ವ್ಯಾಪಾರಕ್ಕೆ ಕುಳಿತ ಶೆಟ್ಟಿ ದಂಪತಿಗಳು, ಅವರ ವ್ಯಾಪಾರೀ ವಸ್ತುಗಳು, ಆಟಿಕೆಗಳು, ಪ್ರಾಣಿಗಳು, ಪಕ್ಷಿಗಳು, ದೇವಾನು ದೇವತೆಗಳು, ಪದ್ಮಾವತಿ ಪರಿಣಯ, ಗೋಕುಲದ ಶ್ರೀಕೃಷ್ಣ, ದಶಾವತಾರ, ಕಾಳಿಂಗಮರ್ಧನ, ಕೈಲಾಸ, ಅನಂತಪದ್ಮನಾಭ, ಹಣ್ಣುಗಳು ಮುಂತಾದ ಗೊಂಬೆಗಳು ಸಾಲುಸಾಲಾಗಿ ಜೋಡಿಸಿಡಲಾಗಿದೆ. ಪೈರನ್ನು ಬೆಳೆಸಿ ಹಸುರನ್ನೂ ಮೂಡಿಸಿದ್ದಾರೆ.
‘ನಮ್ಮ ಮನೆಯಲ್ಲಿ ಸುಮಾರು 20 ವರ್ಷಗಳಿಗೂ ಹಿಂದಿನಿಂದ ಈ ಗೊಂಬೆ ಹಬ್ಬವನ್ನು ಆಚರಿಸುವುದು ರೂಢಿಯಲ್ಲಿದೆ. ನಾವು ಹೋದೆಡೆಯಲ್ಲೆಲ್ಲಾ ಗೊಂಬೆಗಳನ್ನು ಮತ್ತು ಅವುಗಳನ್ನು ಅಲಂಕರಿಸಲು ಬೇಕಾದ ವಸ್ತುಗಳನ್ನು ಹುಡುಕುತ್ತೇವೆ. ಮನೆಯಲ್ಲಿ ಗೊಂಬೆಗಳನ್ನು ವಸ್ತು ವಿಷಯಕ್ಕೆ ಸಂಬಂಧಿಸಿದಂತೆ ತಯಾರಿಸುತ್ತೇವೆ ಹಾಗೂ ಅಲಂಕರಿಸುತ್ತೇವೆ. ಗೊಂಬೆಗಳನ್ನು ನೋಡಲು ಬರುವ ಮಕ್ಕಳಿಗೆ ಸಿಹಿ ನೀಡಿ ಕಥೆ ಹೇಳುತ್ತೇವೆ. ಮನೆಯ ಹತ್ತಿರದ ಕೆಲ ಮಕ್ಕಳು ಕುಸುರಿ ಕೆಲಸ, ಗೊಂಬೆ ಅಲಂಕಾರ ಹಾಗೂ ಕಸದಿಂದ ರಸ ಎಂಬಂತೆ ಬಿಸಾಡುವ ಪದಾರ್ಥದಿಂದ ಕಲಾಕೃತಿ ಮಾಡುವುದನ್ನು ಕಲಿಸುತ್ತೇವೆ’ ಎಂದು ಡಿ.ಮಂಜುನಾಥ್ ತಿಳಿಸಿದರು.