Home News ವಿಶ್ವ ಬಾಲ ಕಾರ್ಮಿಕರ ವಿರೋಧಿ ದಿನಾಚರಣೆ

ವಿಶ್ವ ಬಾಲ ಕಾರ್ಮಿಕರ ವಿರೋಧಿ ದಿನಾಚರಣೆ

0

ನಗರದ ಸರ್ಕಾರಿ ಪ್ರೌಡಶಾಲಾ ಆವರಣದಲ್ಲಿ ಗುರುವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಹಾಗು ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ “ವಿಶ್ವ ಬಾಲ ಕಾರ್ಮಿಕರ ವಿರೋಧಿ ದಿನಾಚರಣೆ” ಅಂಗವಾಗಿ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಜೆಎಂಎಫ್‌ಸಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ಡಿ.ಆರ್.ಮಂಜುನಾಥ್ ಮಾತನಾಡಿದರು.
ಅಪ್ರಾಪ್ತ ವಯಸ್ಕರರನ್ನು ಕಾರ್ಖಾನೆ ಮತ್ತಿತರೆ ಕಡೆ ದುಡಿಮೆ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಕೇವಲ ಕಾನೂನು ದೃಷ್ಟಿಯಿಂದ ಅಪರಾಧ ಅಷ್ಟೇ ಅಲ್ಲದೆ, ಸಾಮಾಜಿಕವಾಗಿಯೂ ದುಷ್ಪರಿಣಾಮ ಬೀರಲಿದೆ ಎಂದು ಅವರು ತಿಳಿಸಿದರು.
ಬಾಲ ಕಾರ್ಮಿಕ ಪದ್ಧತಿಗೆ ಬಡತನ, ಅನಕ್ಷರತೆ, ಮೂಢನಂಬಿಕೆ ಮೊದಲಾದ ಏನೇ ಕಾರಣಗಳಿರಬಹದು. ಅವೆಲ್ಲವನ್ನೂ ಮೀರಿ ನಾವು ನೀವೆಲ್ಲರೂ ಸೇರಿ ಈ ಅನಿಷ್ಟ ಪದ್ಧತಿಯನ್ನು ನಿರ್ನಾಮ ಮಾಡಲು ಮುಂದಾಗಬೇಕಿದೆ. ಈ ಪದ್ಧತಿಯನ್ನು ಕೇವಲ ಕಾರ್ಮಿಕ ಇಲಾಖೆ ಅಥವ ಕಾನೂನಿನಿಂದ ನಿಯಂತ್ರಿಸಲು ಸಾಧ್ಯವಿಲ್ಲ. ಸಮಾಜದ ಎಲ್ಲರೂ ಕೈಜೋಡಿಸಿ ಅನಿಷ್ಟ ಪದ್ಧತಿಗೆ ತಿಲಾಂಜಲಿ ಇಡಬೇಕಿದೆ. ಈ ದೇಶದ ಭವಿಷ್ಯದ ಪ್ರಜೆಗಳನ್ನು ಉತ್ತಮವಾಗಿ ರೂಪಿಸಲು ಎಲ್ಲರಿಗೂ ಉತ್ತಮ ಶಿಕ್ಷಣ ಸಿಗುವಂತಹ ವಾತಾವರಣ ನಿರ್ಮಿಸಬೇಕಿದೆ ಎಂದರು.
ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಚಂದ್ರಶೇಖರಗೌಡ ಮಾತನಾಡಿ, ಹದಿನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ತೆಗೆದುಕೊಂಡರೆ ಅದು ಶಿಕ್ಷಾರ್ಹ ಅಪರಾಧ. ಅಂತಹ ಸಂದರ್ಭದಲ್ಲಿ ಕೆಲಸಕ್ಕೆ ತೆಗೆದುಕೊಂಡವರಿಗೆ ದಂಡದ ಜತೆಗೆ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಬಹುದು. ಬಾಲಕರನ್ನು ನೇಮಿಸಿಕೊಳ್ಳುವುದು ಎಷ್ಟು ತಪ್ಪೋ ದುಡಿಮೆಗೆ ದೂಡುವುದು ಕೂಡ ಅಷ್ಟೇ ಅಪರಾಧ. ನೇಮಕ ಮಾಡಿಕೊಳ್ಳುವ ಮಾಲೀಕರು ಹಾಗೂ ಅದಕ್ಕೆ ಅವಕಾಶ ಕೊಡುವ ಪೋಷಕರೂ ಸಹ ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾಗುತ್ತದೆ ಎಂದರು.
ಜೆಎಂಎಫ್‌ಸಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂಜುಕುಮಾರ್ ಎ ಪಚ್ಚಾಪುರೆ, ಸಿವಿಲ್ ನ್ಯಾಯಾಧೀಶರಾದ ಡಿ.ರೋಹಿಣಿ, ಸಹಾಯಕ ಸರ್ಕಾರಿ ಅಭಿಯೋಜಕಿ ಎಸ್.ಕುಮುದಿನಿ, ವಕೀಲರ ಸಂಘದ ಕಾರ್ಯದರ್ಶಿ ಎಂ.ಬಿ.ಲೋಕೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ಕಾರ್ಮಿಕ ನಿರೀಕ್ಷಕಿ ಕಲಾವಾಣಿ ಹಾಜರಿದ್ದರು.