ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕೆಂಬ ಉದ್ದೇಶದಿಂದ ಸರ್ಕಾರದಿಂದ ನೀಡಲಾಗುವ ಸೈಕಲ್ಗಳನ್ನು ಸದುಪಯೋಗಪಡಿಸಿಕೊಂಡು ಗ್ರಾಮೀಣ ಪ್ರದೇಶದ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ಜಯಂತಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ೨೦೧೭–೧೮ ನೇ ಸಾಲಿನ ಸರ್ಕಾರದ ಉಚಿತ ಸೈಕಲ್ ವಿತರಣೆ, ಸಮವಸ್ತ್ರ ಮತ್ತು ಶೂ ವಿತರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೂ ಉತ್ತಮ ಶಿಕ್ಷಣ ಸಿಗಬೇಕು ಎಂಬ ಉದ್ದೇಶದಿಂದ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಅವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಸರ್ಕಾರದಿಂದ ನೀಡುವ ಉಚಿತ ಸೈಕಲ್ಗಳನ್ನು ವಿದ್ಯಾರ್ಥಿಗಳ ಪೋಷಕರು ದುರುಪಯೋಗ ಮಾಡಿಕೊಳ್ಳಬಾರದು. ಮಕ್ಕಳು ಶಿಸ್ತು, ಶ್ರಮ ಮತ್ತು ಗುರಿಯನ್ನು ಜೀವನದಲ್ಲಿ ಮೈಗೂಡಿಸಿಕೊಂಡು ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ಬೆಳೆಯಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ೮ ನೇ ತರಗತಿಯ ಸುಮಾರು ೪೯ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಹಾಗೂ ೯ ಮತ್ತು ೧೦ ನೇ ತರಗತಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಶೂ ವಿತರಣೆ ಮಾಡಲಾಯಿತು.
ಜಿಲ್ಲಾ ಪಂಚಾಯ್ತಿ ಸದಸ್ಯ ಬಂಕ್ ಮುನಿಯಪ್ಪ, ನಗರಸಭೆ ಅಧ್ಯಕ್ಷ ಅಪ್ಸರ್ಪಾಷ, ಮುಖಂಡರಾದ ಕೆ.ಎಸ್.ಕನಕಪ್ರಸಾದ್, ರಮೇಶ್, ದೇವರಾಜ್, ಪ್ರಭು, ಲಕ್ಮಿನಾರಾಯಣ, ಕ್ರೀಡಾಪಟು ನಾರಾಯಣಸ್ವಾಮಿ, ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -