
Sidlaghatta : ವಚನ ಸಾಹಿತ್ಯದ ಮೂಲಕ ಸಾಮಾಜಿಕ ಮೌಢ್ಯತೆಯನ್ನು ಹೊಡೆದು ಹಾಕುವಲ್ಲಿ ಶ್ರಮಿಸಿದ ನಿಜಶರಣ ಅಂಬಿಗರ ಚೌಡಯ್ಯ ಅವರ ಸಾಧನೆ ಅವಿಸ್ಮರಣೀಯ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಭಾನುವಾರ ಆಯೋಜಿಸಿದ್ದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಹನ್ನೆರಡನೇ ಶತಮಾನದಲ್ಲಿ ಸುಮಾರು 300 ಕ್ಕೂ ಹೆಚ್ಚು ವಚನಗಳನ್ನು ರಚಿಸಿದ ಅಂಬಿಗರ ಚೌಡಯ್ಯನವರು ತಮ್ಮ ವಚನಗಳಿಂದ ಸಮಾಜ ಪರಿವರ್ತನೆಗೆ ಶ್ರಮಿಸಿದ ಮಹಾನ್ ಶರಣರಾಗಿದ್ದರು. ಶರಣರ ಮಹತ್ವಗಳನ್ನು ತತ್ವಗಳನ್ನು ಮತ್ತು ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆದಾಗ ಮಾತ್ರ ಶರಣರ ಜಯಂತ್ಯುತ್ಸವ ಆಚರಿಸುವುದು ಸಾರ್ಥಕ ವಾಗುತ್ತದೆ. ನೇರ ನಡೆ ನುಡಿಗೆ ಹೆಸರಾದ ಚೌಡಯ್ಯನವರು ನಿಜ ಶರಣ ಎಂದೇ ಖ್ಯಾತಿಯನ್ನು ಗಳಿಸಿದ್ದರು ಎಂದರು.
ತಹಶೀಲ್ದಾರ್ ಬಿ.ಎನ್.ಸ್ವಾಮಿ ಮಾತನಾಡಿ, ನಿಜಶರಣ ಅಂಬಿಗರ ಚೌಡಯ್ಯನವರು ತಮ್ಮ ವಚನಗಳ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದ ಮಹಾನ್ ಶರಣರು. ಅವರ ಆದರ್ಶ ತತ್ವಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಪಾಲಿಸಿದಾಗ ಒಳ್ಳೆಯ ಸುಸಂಸ್ಕೃತ ಸಮಾಜ ನಿರ್ಮಣ ಸಾಧ್ಯ ಎಂದು ತಿಳಿಸಿದರು.
ಉಪನ್ಯಾಸಕರಾದ ಬಿ.ವಿ.ಪ್ರಕಾಶ್ ನಿಜಶರಣ ಅಂಬಿಗರ ಚೌಡಯ್ಯನವರ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಸಕರ ವತಿಯಿಂದ ನಗದು ಬಹುಮಾನದೊಂದಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ತಾ.ಪಂ ಇಓ ಜಿ.ಮುನಿರಾಜ, ನಗರಸಭೆ ಪೌರಾಯುಕ್ತ ಮಂಜುನಾಥ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ರಾಮಚಂದ್ರ, ತಾಲ್ಲೂಕು ಬೆಸ್ತರ ಸಂಘದ ಅಧ್ಯಕ್ಷ ಶಿವಣ್ಣ, ಮೇಲೂರು ಮಂಜುನಾಥ್, ಲಕ್ಷ್ಮಿನಾರಾಯಣ(ಲಚ್ಚಿ), ಉಪನ್ಯಾಸಕ ಬಿ.ವಿ.ಪ್ರಕಾಶ್ ಹಾಜರಿದ್ದರು.