Sidlaghatta : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ರಾಜ್ಯ ಸಂಸ್ಥೆಯ ರಾಜ್ಯ ಪುರಸ್ಕಾರ ಪ್ರಶಸ್ತಿಗೆ ಶಿಡ್ಲಘಟ್ಟದ ಎಂಟು ಮಂದಿ ಬುಲ್ ಬುಲ್ ಮತ್ತು ಸ್ಕೌಟ್ಸ್ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಸೋಮವಾರ ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಬಿಜಿಎಸ್ ಶಾಲೆಯ ಬುಲ್ ಬುಲ್ಗಳಾದ ಪಿ.ಆಧ್ಯಗೌಡ, ಜಿ.ಎಸ್.ಸೌಹಾರ್ಧ, ವಿ.ವೆನ್ನಲ, ಎ.ಪಿ.ಲಕ್ಷಿತ ಮತ್ತು ಸಿಟಿಜನ್ ಶಾಲೆಯ ಸ್ಕೌಟ್ಸ್ಗಳಾದ ಹರ್ಷಿತ, ಕಾರ್ತಿಕ್, ಮುಸ್ತಫ ಹಾಗೂ ಜಂಗಮಕೋಟೆ ಸರ್ಕಾರಿ ಪ್ರೌಢಶಾಲೆಯ ಕೆ.ಎಸ್.ದುಶ್ಯಂತ್ ರಾಜ್ಯ ಪುರಸ್ಕಾರ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಜಿಲ್ಲೆಯಿಂದ ಒಟ್ಟು 20 ಬುಲ್ ಬುಲ್ ಮತ್ತು ಸ್ಕೌಟ್ಸ್ ವಿದ್ಯಾರ್ಥಿಗಳು ರಾಜ್ಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು, ಈ ಪೈಕಿ ಶಿಡ್ಲಘಟ್ಟ ತಾಲ್ಲೂಕಿನ 8 ಮಂದಿ ವಿದ್ಯಾರ್ಥಿಗಳು ಈ ಗೌರವಕ್ಕೆ ಭಾಜನರಾಗಿದ್ದಾರೆ.
ರಾಜ್ಯ ಮಟ್ಟದಲ್ಲಿ ಪುರಸ್ಕಾರ ಪಡೆದವರಿಗೆ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಿದರೆ, ಜಿಲ್ಲೆಯಲ್ಲಿ ಆಯ್ಕೆಯಾದ ಇತರ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪತ್ರ ವಿತರಿಸಲಾಗುವುದು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಕಾರ್ಯದರ್ಶಿ ಸಿ.ಬಿ.ಪ್ರಕಾಶ್ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್, ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ, ಚಿಕ್ಕಬಳ್ಳಾಪುರ ಜಿಲ್ಲೆಯ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮುನಿ ಕೆಂಪೇಗೌಡ, ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ಸಿ.ಬಿ.ಪ್ರಕಾಶ್, ಗೈಡ್ ವಿಭಾಗದ ಡಿಟಿಸಿ ಲಕ್ಷ್ಮಿ ಹೊನ್ನಪ್ಪ ನಾಯಕ್, ರಾಜ್ಯ ಮತ್ತು ಜಿಲ್ಲಾ ಸಂಸ್ಥೆಯ ಪದಾಧಿಕಾರಿಗಳು, ರಾಜ್ಯ ಪುರಸ್ಕಾರ ಪಡೆದ ಕಬ್ಸ್, ಬುಲ್ ಬುಲ್ಸ್, ಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್ಸ್, ಹಾಗೂ ಪೋಷಕರು ಉಪಸ್ಥಿತರಿದ್ದರು.